675
ಕುಮಟಾ : ಭ್ರಷ್ಟ ಬಿಜೆಪಿ ಸರ್ಕಾರವನ್ನು ಜನರು ಕಿತ್ತೆಸೆದು, ಕಾಂಗ್ರೆಸ್ ಸರ್ಕಾರವನ್ನು ಅಭೂತಪೂರ್ವಾಗಿ ಬೆಂಬಲಿಸಿದರು. ಜನರು ನಂಬಿದಂತೆ ನಾವು ನಡೆದುಕೊಂಡಿದ್ದೇವೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎನ್ನಲು ಹೆಮ್ಮೆ ಎನಿಸುತ್ತದೆ. ಎಂದು ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭುವನ್ ಭಾಗ್ವತ್ ಹೇಳಿದರು. ಅವರು ಕುಮಟಾದಲ್ಲಿ ಕಾಂಗ್ರೆಸ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ, ನಾವು ರಾಜ್ಯದ ಜನತೆಗೆ ಹಾಗೂ ಬಡ ಜನತೆಗೆ ಏನೇನು ಬೇಕು ಎನ್ನುವುದನ್ನು ಅರ್ಥ ಮಾಡಿಕೊಂಡು 594 ಅಂಶಗಳ ಪ್ರಣಾಳಿಕೆಯನ್ನು ನಾವು ಸಿದ್ಧಪಡಿಸಿದ್ದೆವು. ಅದರಲ್ಲಿ 243 ನ್ನು ಈಗಾಗಲೇ ನಾವು ಪೂರ್ಣಗೊಳಿಸಿದ್ದೇವೆ. ಅದರ ಜೊತೆಗೆ ನಾ ಭೂತೋ ನಾ ಭವಿಷ್ಯತಿ ಎನ್ನುವಂತೆ ಜಾರಿಗೊಳಿಸಿದ ಪಂಚ ಗ್ಯಾರಂಟಿಗಳನ್ನು ಜನತೆಗೆ ನೀಡುತ್ತಿದ್ದೇವೆ. ಇಂತಹ ಕಾರ್ಯಕ್ರಮವನ್ನು ಬೇರೆ ಯಾವುದೇ ಪಕ್ಷದವರು ಈವರೆಗೆ ಜಾರಿಗೊಳಿಸಲಿಲ್ಲ ಮುಂದೆಯೂ ಜಾರಿಗೊಳಿಸಲು ಸಾಧ್ಯವಿಲ್ಲ. ಕೇವಲ ಘೋಷಣೆಯನ್ನು ಅಷ್ಟೇ ಮಾಡದೆ ಚಾಚೂ ತಪ್ಪದೆ ಅದನ್ನು ಜನರಿಗೆ ತಲುಪಿಸುವ ಕಾರ್ಯವನ್ನು ನಾವು ಮಾಡಿದ್ದೇವೆ ಎಂದರು.
ಶಕ್ತಿ ಯೋಜನೆಯಲ್ಲಿ ತಾಲೂಕಿನಲ್ಲಿ 2 ಕೋಟಿ 45 ಲಕ್ಷ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ. ಇದರ ವೆಚ್ಚ ಸುಮಾರು 45 ಕೋಟಿ ರೂ. ಆಗಲಿದೆ. ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಸುಮಾರು 35 ಸಾವಿರಕ್ಕೂ ಅಧಿಕ ಜನರು ಪಡೆಯುತ್ತಿದ್ದಾರೆ. ಗೃಹಜ್ಯೋತಿಯಲ್ಲಿ 100 ಪ್ರತಿಶತ ಸಾಧನೆ ಮಾಡಿದ್ದೇವೆ. ಗ್ಯಾರಂಟಿಗಳ ಜೊತೆ ಜೊತೆಗೆ, ಜನತೆಗೆ ಏನೆಲ್ಲಾ ಅಭಿವೃದ್ಧಿ ಆಗಬೇಕು ಅವುಗಳನ್ನು ಸರಕಾರ ಮಾಡುತ್ತಿದೆ ಎಂದರು.
ಶಾಸಕರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೆ ಕೆಲಸ ಇಲ್ಲ.
ಕುಮಟ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರು ಶಾಸಕರ ಅನುದಾನವೂ ಸರಿಯಾಗಿ ಬಿಡುಗಡೆಯಾಗುತ್ತಿಲ್ಲ. ಕಾಂಗ್ರೆಸ್ ಸರಕಾರದ್ದು ಶೂನ್ಯ ಸಾಧನೆಯ ಸಮಾವೇಶ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿರುವ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭುವನ್ ಭಾಗ್ವತ್ ನಮ್ಮ ಶಾಸಕರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೆ ಕೆಲಸ ಇಲ್ಲ. ಕಾಂಗ್ರೆಸ್ ಸರಕಾರ ಜನರಿಗೆ ಅನುಕೂಲವಾಗುವ ಯೋಜನೆಗಳಿಗೆ ಸಾಕಷ್ಟು ಅನುದಾನವನ್ನು ಒದಗಿಸುತ್ತಿದೆ. 2023 – 24 ನೇ ಸಾಲಿನಲ್ಲಿ ಸುಮಾರು 11 ಕೋಟಿ, 24 – 25 ನೇ ಸಾಲಿನಲ್ಲಿ 23 ಕೋಟಿ 91 ಲಕ್ಷ ರೂಪಾಯಿ ಅನುದಾನವನ್ನು ಕುಮಟ ಕ್ಷೇತ್ರಕ್ಕೆ ನೀಡಲಾಗಿದೆ. ಕಲಭಾಗ ಸೇತುವೆ ಸೇರಿದಂತೆ ಇತರ ಸಾಕಷ್ಟು ಯೋಜನೆಗೆ ಅನುದಾನ ಬಿಡುಗಡೆಯಾಗಿದೆ ಎಂದರು.
ಬಿಜೆಪಿ ಅವಧಿಯಲ್ಲಿ ಅವರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕರು ಹೇಳಲಿ.
ಕಾಂಗ್ರೆಸ್ ಸರ್ಕಾರದ ಕುರಿತಾಗಿ ಟೀಕಿಸುವ ಶಾಸಕರು, ಬಿಜೆಪಿ ಅವಧಿಯಲ್ಲಿ ಯಾವೆಲ್ಲ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎನ್ನುವುದರ ಪಟ್ಟಿ ಬಿಡುಗಡೆ ಮಾಡಲಿ ಎಂದು ನಿಕಟ ಪೂರ್ವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ನಾಯಕ ಶಾಸಕರ ವಿರುದ್ಧ ಸವಾಲೆಸೆದರು. ತಾಲೂಕಿನಲ್ಲಿ ಎಲ್ಲೆಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಎಲ್ಲಾ ಕೆಲಸಗಳನ್ನು ಮಾಡಿಕೊಡುತ್ತಿದ್ದೇವೆ. ಶಾಲೆಯ ಕಟ್ಟಡಕ್ಕೆ ಸರಿ ಸುಮಾರು ಎರಡು ಕೋಟಿ ರೂಪಾಯಿ ಬಿಡುಗಡೆಯಾಗಿದೆ ಶಾಸಕರೇ ಅಡಿಗಲ್ಲು ಸಮಾರಂಭದಲ್ಲಿಯೂ ಭಾಗವಹಿಸುತ್ತಿದ್ದಾರೆ, ಆದರೆ ಈ ರೀತಿ ಹೇಳಿಕೆ ಕೊಡುವುದು ಸರಿಯಲ್ಲ.