ಕಾರವಾರ : ರಾಜ್ಯದಲ್ಲಿ ಕೆಲ ವಾರಗಳಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದೆ. ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈಗಾಗಲೇ ಉತ್ತರಕನ್ನಡ, ಬೆಂಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ.
ಈ ನಡುವೆ ಉತ್ತರಕನ್ನಡ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಹಲ ತಾಲೂಕಿಗೆ ಇಂದು (ಜೂನ್ 12) ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ , ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಆದೇಶ ಇಂತಿದೆ.
ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರಕನ್ನಡ ಜಿಲ್ಲೆಯಲ್ಲಿ ದಿನಾಂಕ: 11-06-2025 ರಿಂದ 17-06-2025 ರವರೆಗೆ ಭಾರಿ ಮಳೆಯಾಗುವ ಸೂಚನೆ (ರೆಡ ಅಲರ್ಟ್) ಯನ್ನು ಉಲ್ಲೇಖ (1) ರನ್ವಯ ನೀಡಿರುತ್ತಾರೆ. ಉಲ್ಲೇಖ 3 ರ ಪ್ರಸ್ತಾವನೆಯನ್ನು ಸಹ ಪರಿಗಣಿಸಿ, ಮಕ್ಕಳ ಹಿತದೃಷ್ಟಿಯಿಂದ ರೆಡ್ ಅಲರ್ಟ್ ಸಮಯದಲ್ಲಿ ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕಾರವಾರ ಅಂಕೋಲಾ ಕುಮಟಾ ಹೊನ್ನಾವರ ಭಟ್ಕಳ ತಾಲೂಕಿನಾದ್ಯಂತ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ಈ ಕೆಳಗಿನಂತೆ ಆದೇಶ ಮಾಡಿದೆ.
ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34(ಎಮ್) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರಕನ್ನಡ ಜಿಲ್ಲೆಯ ಕಾರವಾರ,ಅಂಕೋಲಾ,ಕುಮಟಾ,ಹೊನ್ನಾವರ, ಭಟ್ಕಳ ತಾಲೂಕಿನಾದ್ಯಂತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಂಗನವಾಡಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಮಕ್ಕಳ ಹಿತದೃಷ್ಟಿಯಿಂದ ದಿನಾಂಕ: 12-06-2025 ರಂದು ರಜೆ ಘೋಷಿಸಿ ಆದೇಶಿಸಿದೆ.