ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲ್ಲೂಕುಗಳಲ್ಲಿರುವ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಇಂದು(ಗುರುವಾರ) ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಇಂದು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಆದೇಶ ಇಂತಿದೆ.
ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ: 16-07-2025 ರಿಂದ ದಿನಾಂಕ 17-07-2025 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ (ಅರೆಂಜ್ ಅಲರ್ಟ್) ನ್ನು ಉಲ್ಲೇಖ (1) ರನ್ವಯ ನೀಡಿರುತ್ತಾರೆ. ಉಲ್ಲೇಖ 3 ರ ತಹಸೀಲ್ದಾರದ ಮೌಖಿಕ ಕೊರಿಕೆಯಂತೆ, ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ, ಕಾರವಾರ ಅಂಕೋಲಾ, ಭಟ್ಕಳ, ಹೊನ್ನಾವರ ಹಾಗೂ ಕುಮದಾ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೇಲೆ ತಿಳಿಸಿದ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ, ಪ್ರೌಡ ಶಾಲೆ ಮತ್ತು ಅಂಗನವಾಡಿಗಳಿಗೆ ದಿನಾಂಕ: 17-07-2025 ರಂದು ಮಾತ್ರ ರಜೆ ಘೋಷಿಸುವ ಬಗ್ಗೆ ಈ ಕೆಳಗಿನಂತೆ ಆದೇಶ ಮಾಡಿದೆ.
ಆದೇಶ
ಈ ಮೇಲಿನ ಪ್ರಸ್ತಾವನೆಯಲ್ಲಿ ವಿವರಿಸಿದ ಕಾರಣಗಳಿಂದ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಅಂಕೋಲಾ, ಭಟ್ಕಳ, ಹೊನ್ನಾವರ ಹಾಗೂ ಕುಮಟಾ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ, ಪ್ರೌಡ ಶಾಲೆ ಮತ್ತು ಅಂಗನವಾಡಿಗಳಿಗೆ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ದಿನಾಂಕ:17-07-2025 ರಂದು ರಜೆ ಘೋಷಣೆ ಮಾಡಲಾಗಿದೆ.
ಸದ್ರಿ ಅದೇಶವನ್ನು, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ ರವರು ಕಾರ್ಯ ರೂಪಕ್ಕೆ ತರುವುದು ಎಂದು ತಿಳಿಸಲಾಗಿದೆ.