Home State News ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಬಹುಮತ ಸಾಬೀತು : ಮುಂದಿನ ಆರು ತಿಂಗಳು ಸರ್ಕಾರ ಸೇಫ್!

ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಬಹುಮತ ಸಾಬೀತು : ಮುಂದಿನ ಆರು ತಿಂಗಳು ಸರ್ಕಾರ ಸೇಫ್!

ಬೆಂಗಳೂರು: ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ಮಂಡಿಸಿದ ವಿಶ್ವಾಸಮತಕ್ಕೆ ಬಹುಮತ ದೊರಕಿದೆ. 105 ಶಾಸಕರು ಸರ್ಕಾರದ ಪರ ಬೆಂಬಲ ವ್ಯಕ್ತಪಡಿಸಿದ ಪರಿಣಾಮ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕೃತವಾಗಿ ಕರ್ನಾಟಕದ ಚುಕ್ಕಾಣಿ ಹಿಡಿದಿದೆ ಎಂದು ತಿಳಿದುಬಂದಿದೆ.

ಕರ್ನಾಟಕ ವಿಧಾನಸಭೆಯ ಒಟ್ಟು ಸಂಖ್ಯಾಬಲ 224 ಆಗಿದ್ದು 17 ಮಂದಿಯನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. 105 ಶಾಸಕರ ಬೆಂಬಲ ಹೊಂದಿದ್ದರಿಂದ ಬಿಎಸ್‍ವೈ ಬಹುಮತ ಸಾಬೀತು ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. ಬಹುಮತ ಸಾಬೀತು ಪಡಿಸಲು 105 ಶಾಸಕರ ಬೆಂಬಲ ಬೇಕಿತ್ತು. ಧ್ವನಿಮತದ ಮೂಲಕ ಯಡಿಯೂರಪ್ಪ ಸರ್ಕಾರ ಪಾಸ್ ಆಗಿದ್ದು ಮುಂದಿನ 6 ತಿಂಗಳು ಯಾವುದೇ ಸಮಸ್ಯೆ ಇಲ್ಲದೇ ಅಧಿಕಾರ ನಡೆಸಬಹುದು.

ಸದನದಲ್ಲಿ ಮಾತನಾಡಿದ ಯಡಿಯೂರಪ್ಪ, ನಾನು ದ್ವೇಷದ ರಾಜಕಾರಣ ಮಾಡುವುದಿಲ್ಲ. ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರಕ್ಕೆ ಏರಿದ್ದೇನೆ. ಜನ ಸೇವೆಯೇ ಜನಾರ್ದನ ಸೇವೆ ಎಂದು ತಿಳಿದುಕೊಂಡಿದ್ದೇನೆ. ನಮ್ಮ ಸರ್ಕಾರಕ್ಕೆ ವಿರೋಧ ಪಕ್ಷಗಳ ಸಹ ಬೆಂಬಲ ನೀಡಬೇಕು ಎಂದು ಕೇಳಿಕೊಂಡರು. ನನ್ನನ್ನು ವಿರೋಧಿಸಿದರೂ ನಾನು ದ್ವೇಷ ಮಾಡುವುದಿಲ್ಲ ಎಂದು ತಿಳಿಸಿದರು ಎನ್ನಲಾಗಿದೆ.

ವಿಶ್ವಾಸಮತ ಗೆದ್ದ ನಂತರ ಮಹತ್ವದ ಧನ ವಿನಿಯೋಗ ವಿಧೇಯಕವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲಾ ರೀತಿಯ ಸಹಕಾರ ಕೊಡುವುದಾಗಿ ಭರವಸೆ ನೀಡಿದರು. ವಿಶ್ವಾಸಮತದ ನಿರ್ಣಯಕ್ಕೆ ಧ್ವನಿಮತದ ಗೆಲುವು ಸಿಕ್ಕ ನಂತರ ಹಣಕಾಸು ವಿಧೇಯಕವನ್ನು ಸದನ ಕೈಗೆತ್ತಿಕೊಂಡಿತು ಎಂದು ವರದಿಯಾಗಿದೆ.