Home YELLAPUR ವಿಶ್ವದರ್ಶನ ಸಂಭ್ರಮ ಕಾರ್ಯಕ್ರಮ ಡಿ.16 ರಂದು

ವಿಶ್ವದರ್ಶನ ಸಂಭ್ರಮ ಕಾರ್ಯಕ್ರಮ ಡಿ.16 ರಂದು

ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವಿಶ್ವದರ್ಶನ ಸಂಭ್ರಮ ಕಾರ್ಯಕ್ರಮ ಡಿ.16 ರಂದು ಸಂಜೆ 5 ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಹೇಳಿದರು. ಅವರು ಸಂಸ್ಥೆಯ ಆವಾರದಲ್ಲಿ ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಬಂಟ್ವಾಳದ ಶ್ರೀರಾಮ ವಿದ್ಯಾ ಕೇಂದ್ರದ ಮುಖ್ಯಸ್ಥ ಡಾ.ಕಲ್ಲಡ್ಕ ಪ್ರಭಾಕರ ಭಟ್ಟ ಉದ್ಘಾಟಿಸಲಿದ್ದು, ಪ್ರಧಾನ ಭಾಷಣ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಕೈಪಿಡಿ ಬಿಡುಗಡೆಗೊಳಿಸಲಿದ್ದಾರೆ. ಸಂಸ್ಕೃತ ಅಧ್ಯಾಪಕಿ, ವಿಧಾನ ಪರಿಷತ್ ಮಾಜಿ ಸದಸ್ಯೆ ಡಾ.ಎಸ್.ಆರ್ ಲೀಲಾ ಹಾಗೂ ಬೆಳ್ಳಂಬರದ ನಾಟಿ ವೈದ್ಯ ಹನುಮಂತ ಗೌಡ ಅವರಿಗೆ ಈ ಬಾರಿಯ ವಿಶ್ವದರ್ಶನ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ವಿವರಿಸಿದರು.

ಡಾ.ವಿಜಯ ಸಂಕೇಶ್ವರ ಅವರ ಹೆಸರಿನಲ್ಲಿ, ಸಂಕೇಶ್ವರ ಅವರ ಪ್ರೋತ್ಸಾಹ ಹಾಗೂ ಸಹಕಾರದೊಂದಿಗೆ ಮೀಡಿಯಾ ಸ್ಕೂಲ್ ವಿಶ್ವದರ್ಶನ ಸಂಸ್ಥೆಯಲ್ಲಿ ಆರಂಭಿಸಲಾಗಿದೆ. ಎಲ್ಲ ರೀತಿಯ ಆಧುನಿಕ ಸೌಕರ್ಯಗಳನ್ನು ಹೊಂದಿದ್ದು, ಸ್ವಂತ ಕಟ್ಟಡ, ಇನ್ನಷ್ಟು ಹೊಸತನಗಳನ್ನು ಅಳವಡಿಸಿಕೊಳ್ಳುವ ಯೋಜನೆಯಿದೆ ಎಂದರು.


ಡಾ.ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್ ಪ್ರಾಂಶುಪಾಲ ನಾಗರಾಜ ಇಳೆಗುಂಡಿ ಮಾತನಾಡಿ, ವಿಶ್ವವಿದ್ಯಾಲಯದ ಪಠ್ಯಕ್ರಮದ ಜತೆಗೆ ನಮ್ಮದೇ ಆದ ವಿಶೇಷ ಪಠ್ಯಕ್ರಮವನ್ನೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಬೋಧಿಸಲಾಗುತ್ತದೆ. ಪತ್ರಿಕೆ, ಟಿವಿ ವರದಿಗಾರಿಕೆ, ವಿಡಿಯೊ ಚಿತ್ರೀಕರಣ, ಎಡಿಟಿಂಗ್, ಪುಟ ವಿನ್ಯಾಸ, ಆ್ಯಂಕರಿಂಗ್ ಸೇರಿದಂತೆ ಎಲ್ಲ ಬಗೆಯ ತರಬೇತಿ ನೀಡಲಾಗುವುದು. ಅಲ್ಲದೇ ಪ್ರಾಯೋಗಿಕ ತರಬೇತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದೆಂದರು. ಸಂಸ್ಥೆಯ ಮುಖ್ಯ ಶೈಕ್ಷಣಿಕ ಅಧಿಕಾರಿ ಅಜಯ ಭಾರತೀಯ ಇದ್ದರು.