Home SIRSI ಟಿಕೆಟ್ ಕೈತಪ್ಪಿದ ನಂತರ ಜನತೆಗೆ ಭಾವುಕವಾಗಿ ಬರೆದ ಪತ್ರ ಹಂಚಿಕೊಂಡ ಅನಂತಕುಮಾರ ಹೆಗಡೆ

ಟಿಕೆಟ್ ಕೈತಪ್ಪಿದ ನಂತರ ಜನತೆಗೆ ಭಾವುಕವಾಗಿ ಬರೆದ ಪತ್ರ ಹಂಚಿಕೊಂಡ ಅನಂತಕುಮಾರ ಹೆಗಡೆ

ಬೆಂಗಳೂರು : ಕಳೆದ ಮೂವತ್ತು ವರ್ಷಗಳಿಂದ ಸಂಸದರಾಗಿದ್ದ ಅನಂತಕುಮಾರ‌ ಹೆಗಡೆ ಅವರನ್ನ ಕೈ ಬಿಟ್ಟು ಮಾಜಿ ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಉತ್ತಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲಾಗಿದೆ. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಉ.ಕ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ಕೊನೆಗೂ ಮುಗಿದಿದ್ದು, ಕಾಗೇರಿ ಟಿಕೆಟ್ ಪಡೆದುಕೊಂಡಿದ್ದಾರೆ. ಕಳೆದ ಮೂರು ದಶಕಗಳ ಕಾಲ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಅನಂತಕುಮಾರ ಹೆಗಡೆ ಸಂಸದರಾಗಿದ್ದವರು. ಅವರು ಏಳು ಬಾರಿ ಈ ಕ್ಷೇತ್ರವನ್ನ ಪ್ರತಿನಿಧಿಸಿ ಒಮ್ಮೆ ಮಾತ್ರ ಸೊತ್ತಿದ್ದರು. ಇದೀಗ ಕಾಗೇರಿಯವರಿಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಸ್ವತಂತ್ರವಾಗಿ ಅನಂತಕುಮಾರ ಹೆಗಡೆ ಕಣಕ್ಕೆ ಇಳಿಯುತ್ತಾರಾ ಎಂಬ ಕುತೂಹಲ ಎಲ್ಲೆಡೆ ಮೂಡಿದೆ. ಆದರೆ ಅನಂತಕುಮಾರ್ ಯಾವಾಗಲೂ ಸಿದ್ಧಾಂತಕ್ಕೆ ಬದ್ಧರಾದ ವ್ಯಕ್ತಿ ಹಾಗಾಗಿ ಅವರು ಆ ನಿರ್ಧಾರಕ್ಕೆ ಬರುವುದು ಸುಳ್ಳು ಎಂದು ಹೇಳಲಾಗುತ್ತಿದ್ದರೂ, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಒತ್ತಾಸೆ ಏನಿದೆ ಎಂಬುದು ಮಾತ್ರ ನಿಗೂಢ. ಆ ಹಿನ್ನೆಲೆಯಲ್ಲಿ ಅನಂತಕುಮಾರ್ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಮಾತ್ರ ಕಾದು ನೋಡಬೇಕಾಗಿದೆ.

ಬಿಜೆಪಿ ಐದನೇ ಪಟ್ಟಿಯ ಬಿಡುಗಡೆಯಾಗುತ್ತಿದ್ದಂತೆ ಉ.ಕ ಲೋಕಸಭಾ ಕ್ಷೇತ್ರದ ಟಿಕೆಟ್ ಕಳೆದುಕೊಂಡ ಅನಂತಕುಮಾರ ಹೆಗಡೆ ಜನರಿಗೆ ಪತ್ರವೊಂದನ್ನು ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರ ಹೇಳಿಕೆ ಇಂತಿದೆ – ಆತ್ಮೀಯ ಬಂಧುಗಳೇ, ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯವಾದ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ, ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು.

ಆದರೆ, ಆರಂಭ ಎಲ್ಲಿಂದ ತಿಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ ನಾನು ಈ ಪೂಜೆಯನ್ನು ಎಲ್ಲಿಂದ, ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ.

ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ದನ ಆರಾಧನೆ. ಸರಿ ಸುಮಾರು ಮೂವತ್ತು ವರ್ಷಗಳ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ಸ್ನೇಹ, ಪ್ರೀತಿ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು, ಅದು ಅದಮ್ಯ. ಯಾವುದೇ ಪೂಜೆ ಆರಾಧನೆ, ಅದು ಎಂದಿಗೂ ಮುಗಿಯದ ಅನಂತ ಕಾಯಕ. ಈ ತಾಯ್ನೆಲದ ಪೂಜೆಯಲ್ಲಿ, ಆಕೆಯ ಸೇವೆಯಲ್ಲಿ ನನ್ನನ್ನು ನಾನು ಸಮರ್ಪಿಸಿಕೊಳ್ಳುವ ಸೌಭಾಗ್ಯ ಈ ಜನ್ಮದಲ್ಲಿ ಭಗವಂತ ಕರುಣಿಸಿದಕ್ಕೆ, ಈ ಕಣ್ಣಿಗೆ ಕಾಣದ ಆ ಅಕ್ಷಯ ಪಾದಪದ್ಮಗಳಿಗೆ ನನ್ನ ಅನಂತ ನಮನಗಳನ್ನು ಸಲ್ಲಿಸುತ್ತೇನೆ.

ಕಳೆದ 3 ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಯ್ಯೋಗ ಈ ಬದುಕಿನಲ್ಲಿ ನನಗೊಂದು ಗುರುತು ನೀಡಿದೆ. ನಿಜಕ್ಕೂ ಅಷ್ಟೇ ಸಾಕು!!!!! ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೇ ಸಿಕ್ಕೀತು.

ಹೆತ್ತ ತಾಯೊಡಲಿಗೆ, ಬದುಕು ಕೊಟ್ಟ ಈ ಮಣ್ಣಿಗೆ ಗುರುತು ಕೊಟ್ಟ ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ನು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ, ಮತ್ತೊಮ್ಮೆ, ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ. ತಮ್ಮೆಲ್ಲರ ನೆನಪಿನಲ್ಲಿ ಹೃದಯದಾಳದ ಕೃತಜ್ಞತೆಯೊಂದಿಗೆ, ಅನಂತಕುಮಾರ ಹೆಗಡೆ ಎಂದಿದ್ದಾರೆ.

ಪತ್ರ ಇಲ್ಲಿದೆ.

IMG 20240324 WA0022